ಗದಗ: ನಗರದ ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೌಢ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಶ್ರೀ ಐ. ಬಿ. ಬೆನಕೊಪ್ಪ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರ ಪರಿಶ್ರಮವನ್ನು ಗೌರವಿಸುವುದು ಅತ್ಯಂತ ಸಂತೋಷದ ಸಂಗತಿ ಎಂದು ಹೇಳಿದರು. ಪ್ರಶಸ್ತಿ ಎಂದರೆ ಕೇವಲ ಪ್ರಮಾಣ ಪತ್ರ ಅಥವಾ ಪದಕವಲ್ಲ; ಅದು ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸಿಕ್ಕ ಮಾನ್ಯತೆ ಹಾಗೂ ಅವರ ಕನಸುಗಳಿಗೆ ಸಿಕ್ಕ ಪ್ರೇರಣೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಿಕ್ಷಕರ ಶ್ರಮ, ಪೋಷಕರ ಬೆಂಬಲ ಹಾಗೂ ಶಾಲೆಯ ಸತತ ಮಾರ್ಗದರ್ಶನ ಮಹತ್ವದ್ದಾಗಿದೆ. ಶಿಕ್ಷಕರು ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಹಾಗೂ ಪೋಷಕರು ಮಕ್ಕಳಿಗೆ ಮೊದಲ ಗುರುಗಳು ಎಂದು ಅವರು ಹೇಳಿದರು.
ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ವಿಶಿಷ್ಟ ಕಾರ್ಯಕ್ರಮಗಳು ನಡೆಯಲು ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಸ್. ವಾಯ್. ಚಿಕ್ಕಟ್ಟಿ ಅವರ ವಿಭಿನ್ನ ಚಿಂತನೆಗಳು ಕಾರಣವಾಗಿವೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಶಿಕ್ಷಣ ಸಂಸ್ಥೆ ಗದಗ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ಪ್ರಶಂಸಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಎಸ್. ವಾಯ್. ಚಿಕ್ಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆ, ಸಾಹಿತ್ಯ, ವಿಜ್ಞಾನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೋರಿದ ಪ್ರತಿಭೆ ಮತ್ತು ಪರಿಶ್ರಮವನ್ನು ಗೌರವಿಸುವ ಸಲುವಾಗಿ ಈ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು. ಇಂದಿನ ಸಾಧನೆಯನ್ನು ನಾಳೆಯ ದೊಡ್ಡ ಯಶಸ್ಸಿನ ಮೆಟ್ಟಿಲಾಗಿ ಬಳಸಿಕೊಳ್ಳಬೇಕು. ಈ ಬಾರಿ ಪ್ರಶಸ್ತಿ ಪಡೆಯದ ವಿದ್ಯಾರ್ಥಿಗಳು ನಿರಾಶರಾಗಬಾರದು; ಸೋಲು ಅಂತಿಮವಲ್ಲ, ಅದು ಯಶಸ್ಸಿನ ದಾರಿಯ ಒಂದು ಪಾಠ ಮಾತ್ರ ಎಂದು ಹೇಳಿದರು. ಎಲ್ಲಾ ವಿದ್ಯಾರ್ಥಿಗಳು ಪ್ರಾಮಾಣಿಕತೆ, ಶಿಸ್ತು ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಹಾಗೂ ತಮ್ಮ ಸಾಧನೆಗಳಿಂದ ಶಾಲೆ, ಊರು ಮತ್ತು ದೇಶ ಹೆಮ್ಮೆಪಡುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಐ. ಬಿ. ಬೆನಕೊಪ್ಪ ಅವರನ್ನು ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ಬಿಪಿನ್ ಎಸ್. ಚಿಕ್ಕಟ್ಟಿ, ವಿನಯ್ ಚಿಕ್ಕಟ್ಟಿ ಶಾಲೆಯ ಉಪಪ್ರಾಚಾರ್ಯರಾದ ಶ್ರೀಮತಿ ಶೋಭಾ ಎಸ್. ಸ್ಥಾವರಮಠ, ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ 503 ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳಾದ ಶ್ರೀ ಐ. ಬಿ. ಬೆನಕೊಪ್ಪ ಅವರು ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಕಲ್ಮೇಶ ಬಣವಿ ಪ್ರಾರ್ಥನಾ ಗೀತೆಯನ್ನು ಪ್ರಸ್ತುತಪಡಿಸಿದರು. ಉಪಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ರಿಯಾನಾ ಮುಲ್ಲಾ ಸ್ವಾಗತಿಸಿದರು. ಮುಖ್ಯ ಅತಿಥಿಗಳ ಪರಿಚಯವನ್ನು 9ನೇ ತರಗತಿಯ ವಿದ್ಯಾರ್ಥಿನಿಯರಾದ ರೂಹಿನಾಝ್ ಬಳ್ಳಾರಿ ಹಾಗೂ ಕೀರ್ತಿ ಗೋಡಿ ನೀಡಿದರು. ಶಿಕ್ಷಕರಾದ ಗಣೇಶ ಬಡ್ನಿ ಕಾರ್ಯಕ್ರಮ ನಿರೂಪಿಸಿದರು. ಪ್ರಶಸ್ತಿ ಪತ್ರ ವಿತರಣಾ ಪಟ್ಟಿಯನ್ನು ಶಿಕ್ಷಕಿಯರಾದ ಶ್ರೀನಿಧಿ ಕುಲಕರ್ಣಿ, ರೋಹಿಣಿ ಹಲಗತ್ತಿ ಹಾಗೂ ರಮೀಜಾ ಮುಕ್ತಿ ವಾಚಿಸಿದರು. ಶಿಕ್ಷಕರಾದ ಮರಿಯಪ್ಪ ಎಚ್. ವಂದನಾರ್ಪಣೆ ಸಲ್ಲಿಸಿದರು.
