ಗದಗ: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ “ಪಕ್ಷಿಗಳನ್ನು ರಕ್ಷಿಸಿ” ಎಂಬ ಮಹತ್ವದ ಪರಿಸರ ಜಾಗೃತಿ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷಿಗಳಿಗೆ ಆಹಾರ ಮತ್ತು ನೀರಿನ ಕೊರತೆ ಉಂಟಾಗುತ್ತಿರುವುದನ್ನು ಮನಗಂಡು, ಎನ್.ಎಸ್.ಎಸ್. ಸ್ವಯಂಸೇವಕರು ಮಹಾವಿದ್ಯಾಲಯ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು ಮತ್ತು ಕಾಳುಗಳನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಿದರು. ವಿವಿಧ ಸ್ಥಳಗಳಲ್ಲಿ ನೀರಿನ ಪಾತ್ರೆಗಳು ಹಾಗೂ ಆಹಾರವನ್ನು ಇಡಲಾಗಿದ್ದು, ಅವುಗಳನ್ನು ಪ್ರತಿದಿನ ಪರಿಶೀಲಿಸಿ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಸಹ ಸ್ವಯಂಸೇವಕರಿಗೆ ನೀಡಲಾಗಿದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಜೀವಜಾಲದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. “ಪಕ್ಷಿಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಪ್ರಕೃತಿಯ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಇಂತಹ ಸಣ್ಣ ಪ್ರಯತ್ನಗಳನ್ನು ಮಾಡಬೇಕು” ಎಂದು ಉಪನ್ಯಾಸಕರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವಾಗೀಶ ಗು. ರೇಶ್ಮಿ, ಸಹ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವೀರಣ್ಣ ಬಡಿಗೇರ್, ಘಟಕದ ನಾಯಕಿ ಕುಮಾರಿ ನೀಲಮ್ಮ ಸೀತಾರಳ್ಳಿ, ತಂಡ-೧೦ ರ ನಾಯಕ ಕುಮಾರ ಸೋಮಶೇಖರ ಕುರಿ ಹಾಗೂ ಘಟಕದ ಎಲ್ಲಾ ಸ್ವಯಂಸೇವಕರು ಮತ್ತು ವಿವಿಧ ತಂಡಗಳ ನಾಯಕರು ಸಕ್ರಿಯವಾಗಿ ಭಾಗವಹಿಸಿದ್ದರು.
ಪರಿಸರ ಸ್ನೇಹಿ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಎನ್.ಎಸ್.ಎಸ್. ಘಟಕದ ಈ ಪ್ರಯತ್ನ ಶ್ಲಾಘನೀಯವಾಗಿದೆ.
