ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ಜಾಗೃತಿ ಅಗತ್ಯ: ಪ್ರೋ. ಸೈಯ್ಯದ ಮತಿನ್ ಮುಲ್ಲಾ
ಗದಗ, ಜೂನ್ 5: ಇತ್ತೀಚಿನ ದಿನಗಳಲ್ಲಿ ಜಗತ್ತಿನಾದ್ಯಂತ ಸಂಭವಿಸುತ್ತಿರುವ ನೈಸರ್ಗಿಕ ಪ್ರಕೋಪಗಳಿಗೆ ಪ್ರಕೃತಿಯೇ ಕಾರಣವಲ್ಲ; ಬದಲಾಗಿ ಪ್ರಕೃತಿಯ ಸಂಪನ್ಮೂಲಗಳನ್ನು ಅತಿಯಾಗಿ ದುರ್ಬಳಕೆ ಮಾಡುತ್ತಿರುವ ಮಾನವನೇ ಮುಖ್ಯ ಕಾರಣ ಎಂದು ಸನ್ಮಾರ್ಗ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಪ್ರೋ. ಸೈಯ್ಯದ ಮತಿನ್ ಮುಲ್ಲಾ ಅಭಿಪ್ರಾಯಪಟ್ಟರು.
ನಗರದ ಸನ್ಮಾರ್ಗ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವೃಕ್ಷಾರೋಪಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆಯ ಮೂಲಕ ಮಾನವ ಹಾಗೂ ಭೂಮಿಯ ಮೇಲಿನ ಸಮಸ್ತ ಜೀವಿಗಳ ರಕ್ಷಣೆ ಸಾಧ್ಯವಾಗಿದ್ದು, ಪ್ರತಿಯೊಬ್ಬರೂ ಪರಿಸರದ ಬಗ್ಗೆ ಜಾಗೃತಿ ಹೊಂದಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಮತ್ತೋರ್ವ ನಿರ್ದೇಶಕರು ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರಾದ ಪ್ರೋ. ರಾಹುಲ ಒಡೆಯರ್, ವಿಶ್ವ ಪರಿಸರ ದಿನದ ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿದರು. ವಿಶ್ವಸಂಸ್ಥೆಯು 1972ರಲ್ಲಿ ಕೈಗೊಂಡ ನಿರ್ಣಯದಂತೆ ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಆಡಳಿತಾಧಿಕಾರಿಗಳಾದ ಎಂ.ಸಿ. ಹಿರೇಮಠ ಮಾತನಾಡಿ, ಪರಿಸರ ಸಂರಕ್ಷಣೆಯ ಅಗತ್ಯತೆ ಕುರಿತು ಪ್ರತಿಯೊಬ್ಬರಲ್ಲೂ ಅರಿವು ಮೂಡಬೇಕಿದ್ದು, ಆ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಚೇರ್ಮನ್ ಪ್ರೋ. ರಾಜೇಶ್ ಕುಲಕರ್ಣಿ, ಪ್ರಾಚಾರ್ಯ ಪ್ರೋ. ಪುನೀತ್ ದೇಶಪಾಂಡೆ, ನಿರ್ದೇಶಕ ಪ್ರೋ. ರೋಹಿತ್ ಒಡೆಯರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವೃಕ್ಷಾರೋಪಣದ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
