ಗದಗ/ ರೋಣ: ಬೈಕ್ ಹಾಗೂ ಮಣ್ಣು ತುಂಬಿದ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ನಿವಾಸಿಗಳಾದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ ತಳವಾರ (59) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಶರಣಪ್ಪ ಜಾಲಿಹಾಳ ಹಾಗೂ ಸುರೇಶ ತಳವಾರ ಅವರು ಬೈಕ್ನಲ್ಲಿ ಇಟಗಿಯಿಂದ ಹೊಸಳ್ಳಿ ಗ್ರಾಮದ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ರೋಣದಿಂದ ಗಜೇಂದ್ರಗಡದ ಕಡೆಗೆ ಮಣ್ಣು ತುಂಬಿಕೊಂಡು ಅತಿವೇಗವಾಗಿ ತೆರಳುತ್ತಿದ್ದ ಟಿಪ್ಪರ್ ಇಟಗಿ ಕ್ರಾಸ್ ಬಳಿ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ನಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಮಣ್ಣು ತುಂಬಿದ್ದ ಟಿಪ್ಪರ್ ಕೂಡ ಪಲ್ಟಿಯಾಗಿದೆ.ಅಲ್ಲದೇ ಅಕ್ರಮವಾಗಿ ಈ ಮಣ್ಣು ಸಾಗಾಟ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ.
ಘಟನೆ ತಿಳಿದು ಸ್ಥಳಕ್ಕೆ ರೋಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸುವ ವ್ಯವಸ್ಥೆ ಮಾಡಲಾಗಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
