ಗಜೇಂದ್ರಗಡ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಯಲಬುರ್ಗಾ–ಬಾದಾಮಿ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಈರಪ್ಪ ಸಂಗನಾಳ (55) ಎಂದು ಗುರುತಿಸಲಾಗಿದೆ.
ಯಲಬುರ್ಗಾ–ಬಾದಾಮಿ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಈರಪ್ಪ ಸಂಗನಾಳ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಅಪಘಾತದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕದ ಹೊಲಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರ ಸ್ಥಿತಿ ಸೇರಿದಂತೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗಜೇಂದ್ರಗಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಅಗತ್ಯ ಕಾನೂನು ಪ್ರಕ್ರಿಯೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಪಘಾತದ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತಕ್ಕೆ ವಾಹನಗಳ ಅತಿವೇಗವೇ ಕಾರಣವೇ ಅಥವಾ ಇನ್ನಾವುದೇ ಕಾರಣವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
