ಗದಗ, ಆ. 4: ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅನಾಮಧೇಯ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಕೃಷಿ ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ರೋಣ ತಾಲೂಕಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮಲ್ಲಾಪುರ ಗ್ರಾಮದ ಹೊರವಲಯದಲ್ಲಿರುವ ರೈತ ಶರಣಪ್ಪ ಕೌಜಗೇರಿ ಅವರಿಗೆ ಸೇರಿದ ಜಮೀನಿನ ಕೃಷಿ ಹೊಂಡದಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ಕೂಡಲೇ ರೋಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹದ ಕುರಿತು ತನಿಖೆ ಕೈಗೊಂಡಿದ್ದಾರೆ.
ಪ್ರಾಥಮಿಕ ಪರಿಶೀಲನೆಯಲ್ಲಿ ಮೃತ ಮಹಿಳೆಯ ತಲೆಯ ಭಾಗದಲ್ಲಿ ಗಂಭೀರ ಗಾಯದ ಗುರುತುಗಳು ಕಂಡುಬಂದಿದ್ದು, ಕಲ್ಲು ಅಥವಾ ಇತರೆ ಭಾರವಾದ ವಸ್ತುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತ ಮಹಿಳೆ ಗದಗ ಜಿಲ್ಲೆಯವರಲ್ಲದೆ ಬೇರೆ ಜಿಲ್ಲೆಯ ನಿವಾಸಿಯಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು, ಆಕೆಯ ಗುರುತು ಪತ್ತೆಹಚ್ಚಲು ವಿವಿಧ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ. ಕಾಣೆಯಾಗಿರುವ ಮಹಿಳೆಯರ ಕುರಿತು ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನೂ ಪರಿಶೀಲಿಸಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.
ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಗುರುತು ಪತ್ತೆ ಹಾಗೂ ಸಾವಿನ ಹಿಂದಿನ ನಿಜವಾದ ಕಾರಣವನ್ನು ತಿಳಿಯಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
