ಸುದ್ದಿ:
ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಮಕ್ಕಳಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (CWC) ಸದಸ್ಯರು ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಚನಾನಂದ ಶ್ರೀ ವಿರುದ್ಧ ಮಕ್ಕಳಿಂದ ದೂರು ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಜುಳಾ ಅವರ ನೇತೃತ್ವದಲ್ಲಿ ತಂಡ ಮಠಕ್ಕೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿತು. ಮಠದಲ್ಲಿ ಬಾಲಕರು ವಾಸವಿದ್ದ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಮಕ್ಕಳಿಂದ ಬಂದಿರುವ ದೂರುಗಳ ಸತ್ಯಾಸತ್ಯತೆ ತಿಳಿದುಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಸಂದರ್ಭದಲ್ಲಿ ವಚನಾನಂದ ಶ್ರೀಗಳ ಹೇಳಿಕೆಯನ್ನು ಸಹ ದಾಖಲಿಸಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದು, ಪ್ರಕರಣದ ಎಲ್ಲಾ ಆಯಾಮಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.
ಇದರ ಜೊತೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಡಿಸಿಪಿಒ ಟಿ.ಎನ್. ಕವಿತಾ ಸಹ ಮಠಕ್ಕೆ ಭೇಟಿ ನೀಡಿ ಪರಿಶೀಲನೆಯಲ್ಲಿ ಭಾಗವಹಿಸಿದರು.
ಈ ಘಟನೆ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ಕುತೂಹಲ ಮೂಡಿಸಿದೆ.

