ಗದಗ: ಗದಗ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಿ, ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ವಿರುದ್ಧ ಎಚ್ಚರಿಕೆಯ ಗಂಟೆ ಬಾರಿಸಿದ್ದ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಅವರನ್ನು ಕೊಪ್ಪಳ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿಯಾಗಿದ್ದ ಲೋಕೇಶ ಅವರು ಗದಗ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವರದಿ: ಮಹಲಿಂಗೇಶ ಹಿರೇಮಠ. ಗದಗ
ಇತ್ತೀಚೆಗೆ ಬೆಂಗಳೂರು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ ದೇವರಾಜು ಅವರ ವರ್ಗಾವಣೆ ಬೆನ್ನಲ್ಲೇ ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಅವರ ವರ್ಗಾವಣೆ ಆದೇಶ ಹೊರಬಿದ್ದಿರುವುದು ಗಮನಾರ್ಹ. ಈ ಇಬ್ಬರೂ ಅಧಿಕಾರಿಗಳು ಗದಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ತಮ್ಮ ಕಾರ್ಯಕ್ಷಮತೆಯಿಂದ ಗಮನ ಸೆಳೆದಿದ್ದರು.
ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ವಿಜಯ ಬಿರಾದಾರ ಅವರು ಹಲವು ಮಹತ್ವದ ಭ್ರಷ್ಟಾಚಾರ ಪ್ರಕರಣಗಳನ್ನು ಪತ್ತೆಹಚ್ಚಿ, ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದರು. ಇತ್ತೀಚೆಗಷ್ಟೇ ಗದಗ-ಬೆಟಗೇರಿ ನಗರಸಭೆ ಕಚೇರಿಗಳ ಮೇಲೆ ಲೋಕಾಯುಕ್ತ ತಂಡದ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ ಕಾರ್ಯಾಚರಣೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ನಡೆದ ಕಾರ್ಯಾಚರಣೆ ರಾಜ್ಯದ ಗಮನ ಸೆಳೆದಿತ್ತು.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ದೂರುಗಳಿಗೆ ತ್ವರಿತ ಸ್ಪಂದನೆ, ಭ್ರಷ್ಟಾಚಾರದ ವಿರುದ್ಧ ಕಠಿಣ ನಿಲುವು ಹಾಗೂ ನಿರಂತರ ದಾಳಿಗಳ ಮೂಲಕ ವಿಜಯ ಬಿರಾದಾರ ಅವರು ಗದಗ ಜಿಲ್ಲೆಯಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದರು. ಅವರ ವರ್ಗಾವಣೆಯಿಂದ ಜಿಲ್ಲೆಯ ಆಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕರು ಅವರ ಸೇವೆಯನ್ನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಗದಗ ಜಿಲ್ಲೆಯ ಲೋಕಾಯುಕ್ತ ಘಟಕದ ಹೊಣೆಗಾರಿಕೆಯನ್ನು ಲೋಕೇಶ ಅವರು ವಹಿಸಿಕೊಂಡಿದ್ದು, ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ನಿರೀಕ್ಷೆ ವ್ಯಕ್ತವಾಗಿದೆ. ಹೊಸ ಅಧಿಕಾರಿಯ ನೇತೃತ್ವದಲ್ಲಿ ಲೋಕಾಯುಕ್ತ ಇಲಾಖೆ ಹಿಂದಿನಂತೆ ಜನಸ್ನೇಹಿ ಹಾಗೂ ಕಾನೂನುಬದ್ಧ ಕಾರ್ಯಾಚರಣೆಗಳನ್ನು ಮುಂದುವರಿಸಲಿದೆ ಎಂಬ ವಿಶ್ವಾಸ ಸಾರ್ವಜನಿಕ ವಲಯದಲ್ಲಿದೆ.
ಗದಗ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತದ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಸಾಗಲಿವೆ ಎಂಬುದರತ್ತ ಈಗ ಜಿಲ್ಲೆಯ ಜನರ ಗಮನ ನೆಟ್ಟಿದೆ.
