ಗದಗ, ಜು.30: ಮಕ್ಕಳ ಕಳ್ಳನೆಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ನಗರದ ಎಸ್.ಎಂ. ಕೃಷ್ಣ ನಗರ ಕಾಲೋನಿಯಲ್ಲಿ ಎರೆಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಾಂತೇಶ ವಾಲಿಕಾರ (44) ಎಂಬಾತ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆಂದೂರು ಗ್ರಾಮದ ನಿವಾಸಿಯಾಗಿದ್ದು, ಮದ್ಯಪಾನದ ಅಮಲಿನಲ್ಲಿ ರಾತ್ರಿ ವೇಳೆ ಎಸ್.ಎಂ. ಕೃಷ್ಣ ನಗರ ಕಾಲೋನಿಗೆ ಬಂದಿದ್ದಾನೆ. ಹಸಿವಾಗಿದ್ದ ಕಾರಣ ಮನೆ ಮನೆಗೆ ತೆರಳಿ ಊಟ ಕೇಳುತ್ತಿದ್ದ ವೇಳೆ, ಸ್ಥಳೀಯರು ಮಕ್ಕಳ ಕಳ್ಳನೆಂದು ಶಂಕಿಸಿ ಆತನನ್ನು ಹಿಡಿದು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಾಂತೇಶನನ್ನು ಸ್ಥಳೀಯರ ಗುಂಪಿನಿಂದ ರಕ್ಷಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ತಾನು ಹಸಿವಿನಿಂದ ಊಟ ಕೇಳಲು ಮನೆಗಳ ಬಳಿ ತೆರಳಿದ್ದಾಗಿ ಮಹಾಂತೇಶ ಪೊಲೀಸರಿಗೆ ತಿಳಿಸಿದ್ದಾನೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಕ್ಕಳ ಕಳ್ಳತನಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ವಿಚಾರಣೆ ಬಳಿಕ ಮಹಾಂತೇಶನನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ, ವ್ಯಕ್ತಿಯನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ “ಮಕ್ಕಳ ಕಳ್ಳತನಕ್ಕೆ ಯತ್ನ” ಎಂಬ ಶೀರ್ಷಿಕೆಯೊಂದಿಗೆ ವ್ಯಾಪಕವಾಗಿ ಹರಿದಾಡುತ್ತಿದ್ದು, ಈ ಕುರಿತು ಪೊಲೀಸರು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಯಾವುದೇ ಅನುಮಾನಾಸ್ಪದ ಘಟನೆ ಕಂಡುಬಂದರೆ ಕಾನೂನು ಕೈಗೆತ್ತಿಕೊಳ್ಳದೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
